ವಿಷಯಕ್ಕೆ ಹೋಗಿ

ಪ್ರಭುತ್ವಕ್ಕೆ ಬೇಡ ಭಾಷೆ-ಸಂಸ್ಕೃತಿ ಹೊಣೆ: ಕಣವಿ

ಪ್ರಭುತ್ವಕ್ಕೆ ಬೇಡ ಭಾಷೆ-ಸಂಸ್ಕೃತಿ ಹೊಣೆ: ಕಣವಿ
ದಾನ ಚಿಂತಾಮಣಿ ಅತ್ತಿಮಬ್ಬೆ ವೇದಿಕೆ(ಗದಗ) 19- ಭಾಷೆ-ಸಂಸ್ಕೃತಿ ರೂಪಿಸುವ ಇಲ್ಲವೇ ನಿರ್ವಹಿಸುವ ಅಥವಾ ನಿರ್ಧರಿಸುವ ಕಾರ್ಯವನ್ನು ನಾವೆಂದಿಗೂ ಪ್ರಭುತ್ವಕ್ಕೆ ಒಪ್ಪಿಸಬಾರದು. ಅದು ಪ್ರಜಾಸತ್ತಾತ್ಮಕವಾದ ಚೌಕಟ್ಟಿನಲ್ಲಿಯೇ ನಡೆಯಬೇಕು ಎಂದು ಚೆಂಬೆಳಕಿನ ಕವಿ ನಾಡೋಜ ಡಾ. ಚನ್ನವೀರ ಕಣವಿ ಹೇಳಿದರು.
ಶುಕ್ರವಾರ ಇಲ್ಲಿ ಆರಂಭವಾದ 76ನೇ ಅ. ಭಾ. ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.
ಇಂದು ರಾಜಕೀಯ ಭ್ರಷ್ಟತೆ, ಭಂಡತನ ಅತಿಯಾಗಿದೆ. ಸಂಸ್ಕೃತಿ ಬಗೆಗಿನ ರಾಜಕಾರಣಿಗಳ ಅಜ್ಞಾನ ಹೆಚ್ಚಿದೆ. ಅಲ್ಲದೇ ಸಂಸ್ಕೃತಿ ಮೇಲೆ ನಾಗರಿಕತೆಯ ದಾಳಿ ನಡೆದಿದೆ. ಕನ್ನಡನಾಡು ಇಂದು ರಾಜಕೀಯವಾಗಿ, ಸಾಂಸ್ಕೃತಿಕವಾಗಿ ಅನೇಕ ಬಿಕ್ಕಟ್ಟುಗಳನ್ನು ಎದುರಿಸುತ್ತಿದೆ. ಕೆಲವೊಂದು ತಾನೇ ತನ್ನ ಮೈಮೇಲೆ ಎಳೆದುಕೊಂಡ ಬಿಕ್ಕಟ್ಟುಗಳು. ರಾಜಕೀಯ ಎಲ್ಲರನ್ನೂ ಹೆಡೆಮುರಿಗೆ ಕಟ್ಟಿ ಉಸಿರುಗಟ್ಟಿಸುವಂತ ಸ್ಥಿತಿಗೆ ತಲುಪಿಸಿದೆ. ಶಾಂತಿ, ಸಹಿಷ್ಣುತೆ, ಸಹಬಾಳ್ವೆಗೆ ಹೆಸರಾಗಿದ್ದ ನಮ್ಮ ನಾಡಿನಲ್ಲಿ ಇಂದು ಸೇಡು, ಹಿಂಸೆ, ದ್ವೇಷ, ಕ್ರೌರ್ಯ ತಾಂಡವವಾಡುತ್ತಿರುವುದು ದೊಡ್ಡ ವಿರೋಧಾಭಾಸ ಎಂದು ವಿಷಾದಿಸಿದರು.
ಪರವಿಚಾರ, ಪರಧರ್ಮವನ್ನು ಸೈರಿಸುವುದೇ ಬದುಕಿನ ಬಂಗಾರ ಎಂದು ಹೇಳಿದ ಕವಿರಾಜ ಮಾರ್ಗದ ಚಕ್ರವರ್ತಿ ನೃಪತಂಗನ ಮುತ್ತಿನಂಥ ಮಾತನ್ನು ನಾವು ಮರೆತಿದ್ದೇವೆ ಎಂದ ಕಣವಿಯವರು ಈ ಪರಿಸ್ಥಿತಿಗೆ ರಾಜಕೀಯ ಭ್ರಷ್ಟತೆ ಹಾಗೂ ಭಂಡತನ, ಸಂಸ್ಕೃತಿಯ ಬಗೆಗಿರುವ ಅಜ್ಞಾನ ಅಥವಾ ತಪ್ಪು ತಿಳಿವಳಿಕೆ, ಸಂಸ್ಕೃತಿಯ ಮೇಲಿನ ದಾಳಿ ಅಥವಾ ತಾನೇ ಸಂಸ್ಕೃತಿಯೆಂಬ ಭ್ರಮೆ ಹುಟ್ಟಿಸುವ ನಾಗರಿಕತೆಯ ವಿಕಾರ ಈ ಮೂರು ಮುಖ್ಯ ಕಾರಣಗಳು ಎಂದು ಹೇಳಬಹುದು. ಈ ಸಂಘರ್ಷವನ್ನು ನಿವಾರಿಸಿ ಸರಿಯಾದ ತಿಳಿವಳಿಕೆಯನ್ನು ಜನತೆಗೆ ಮಾಡಿಕೊಡುವುದು ಅವಶ್ಯ. ಸಾಹಿತ್ಯ ಮತ್ತು ಕಲೆಗಳ ಮೂಲಕ ಈ ಕಾರ್ಯ ಪರಿಣಾಮಕಾರಿಯಾಗಿ ನಡೆಯಬೇಕಾಗಿದೆ ಎಂದು ಹೇಳಿದರು.
``ಹಿಂದೆ ಕನ್ನಡಿಗರು ಜಾಗೃತವಾಗದ ಕಾಲದಲ್ಲಿ ಅವರನ್ನು ಬಡಿದೆಬ್ಬಿಸುವ ಮಹತ್ಕಾರ್ಯವನ್ನು ಸಾಹಿತ್ಯ ಸಮ್ಮೇಳನಗಳು ಮಾಡುತ್ತಿದ್ದವು. ಉತ್ಸಾಹಿ ಯುಗದಲ್ಲಿ ಸಂಭ್ರಮ, ಸಡಗರ ಮೆರವಣಿಗೆ ಮುಂತಾದವು ನಡೆದವು. ಆದರೆ ಇದು ಬುದ್ಧಿಮತ್ತೆ ಯುಗ, ಭಾವಪ್ರಧಾನವಾದ ಉತ್ಸವ ಯುಗ ನಿಂತುಹೋಗಿದೆ. ಇನ್ನು ಮುಂದೆ ಸಮ್ಮೇಳನಗಳ ಬೌದ್ಧಿಕ ಮಟ್ಟ ಹೆಚ್ಚಬೇಕು. ಅದರಂತೆ ನಮ್ಮ ನಾಡಿನಲ್ಲಿ ಸಂಶೋಧನೆ, ಲಲಿತ ವಾಙ್ಮಯ ಮೊದಲಾದವು ಯಾವ ದಿಸೆಯಲ್ಲಿ ನಡೆದಿವೆ ಎಂಬುದರ ಮಾಪನವಾಗಿ, ಅವುಗಳಿಗೆ ಸರಿಯಾದ ಮಾರ್ಗವನ್ನು ರೂಪಿಸುವ ಯೋಜನೆ, ಸಮ್ಮೇಳನಗಳ ಕಾಲದಲ್ಲಿ ನಡೆಯಬೇಕು. ಸಂಶೋಧಕರು, ಲೇಖಕರು ಸುಸಂಘಟಿತರಾಗಿ ನಮ್ಮ ಜ್ಞಾನದ ಪ್ರತಿಯೊಂದು ಕ್ಷೇತ್ರದ ಸಮೀಕ್ಷೆಯನ್ನು ಮಾಡಿಕೊಳ್ಳಬೇಕು. ಎರಡು ವರ್ಷಕ್ಕೊಮ್ಮೆ ನಡೆಯುತ್ತಿರುವ ಅಖಿಲ ಭಾರತ ಪ್ರಾಚ್ಯ ಸಮ್ಮೇಳನದ ಮಾದರಿಯಲ್ಲಿ ನಮ್ಮ ಸಾಹಿತ್ಯ ಸಮ್ಮೇಳನಗಳು ನಡೆಯಬೇಕು''.
ಐವತ್ತು ವರ್ಷಗಳ ಹಿಂದೆ ಗದುಗಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ಪ್ರೊ. ಕೆ. ಜಿ. ಕುಂದಣಗಾರ ಅವರು ಅಧ್ಯಕ್ಷರಾಗಿದ್ದಾಗ ಹೇಳಿದ ಈ ಮಾತುಗಳು ಇಂದಿಗೂ ಪ್ರಸ್ತುತ ಎಂದು ಡಾ. ಚನ್ನವೀರ ಕಣವಿ ಹೇಳಿದರು.
1961ರಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ತಾವು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದನ್ನು ಸ್ಮರಿಸಿಕೊಂಡ ಕಣವಿ ಅವರು ಅಂದಿಗೂ-ಇಂದಿಗೂ ಕನ್ನಡ ಕಟ್ಟುವಲ್ಲಿ ಶ್ರಮಿಸಿದ ಮಹನೀಯರು ನಾಡಿನ ತುಂಬೆಲ್ಲ ಆಗಿ ಹೋಗಿದ್ದಾರೆ ಎಂದು ಹೇಳಿದರು.
ಕನ್ನಡ ಎನ್ನುವುದು ಭಾಷೆಯೂ ಹೌದು. ದೇಶವೂ ಹೌದು. ಆಗಿನಿಂದ ಈಗಿನವರೆಗೆ ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯ ಶ್ಲಾಘನೀಯ. ಕನ್ನಡದ ಆಶೋತ್ತರಗಳನ್ನು ಹೆಚ್ಚಿಸುತ್ತ ಬಂದಿದೆ. ಇನ್ನು ಮುಂದೆ ರಾಜಕೀಯ ಒತ್ತಡಗಳಿಗೆ ಪರಿಷತ್ ಮಣಿಯಬಾರದು ಎಂದು ಹೇಳಿದರು.
ಈಗ ನಾವು ಇಂಗ್ಲಿಷ್ ವ್ಯಾಮೋಹದಲ್ಲಿ ಸಿಲುಕಿದ್ದೇವೆ. ಕನ್ನಡದ ಬಗ್ಗೆ ದುರಾಭಿಮಾನ ಬೇಡ. ಕನ್ನಡಿಗರು ಭಾಷಾಂಧರಾಗಬೇಕಿಲ್ಲ. ಎಲ್ಲ ಭಾಷೆಗಳು ಸರಸ್ವತಿಯ ಅಂಗವಾದರೂ ಮಾತೃ ಭಾಷೆಗೆ ಮೊದಲ ಪೂಜೆ ಸಲ್ಲಬೇಕು. ಸಾಹಿತ್ಯ ಸಮ್ಮೇಳನಗಳು ಜಾತ್ರೆಯಂತಿದ್ದರೂ ಆಂತರ್ಯದಲ್ಲಿ ಇದು ಸಾಹಿತ್ಯಯಾತ್ರೆ. ಅನೇಕ ಶತಮಾನಗಳಿಂದಲೂ ಕನ್ನಡ ಭಾಷೆ ಅನೇಕ ಸವಾಲುಗಳನ್ನು ಎದುರಿಸುತ್ತ ಬಂದಿದೆ. ಇನ್ನು ಮುಂದೆ ನಾವೆಲ್ಲ ಕನ್ನಡವನ್ನು ಉಳಿಸಿ-ಬೆಳೆಸುವ ಕಾರ್ಯ ಮಾಡಬೇಕಾಗಿದೆ. ಇದಕ್ಕೆ ಇಂತಹ ಸಮ್ಮೇಳನಗಳು ಮತ್ತಷ್ಟು ಇಂಬು ಕೊಡುತ್ತವೆ ಎಂದು ಕಣವಿ ಹೇಳಿದರು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ

ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಪಕ್ವಾಡ್ ಕಾರ್ಯಕ್ರಮ

ಚಿಕ್ಕನಾಯಕನಹಳ್ಳಿ ತಾಲೋಕ್ ಮತಿಘಟ್ಟ 01 ವೃತ್ತದ ಗೋಪಾಲಪುರ ಅಂಗನವಾಡಿ ಕೇಂದ್ರದಲ್ಲಿ  ಪೋಷಣ್ ಪಕ್ವಾಡ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಜಿಲ್ಲಾ ಪೋಷಣ್ ಅಧಿಕಾರಿಯಾದ ಶ್ರೀಮತಿ ರಂಜಿತಾ ಹಾಗೂ ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ವೃತ್ತದ ಮೇಲ್ವಿಚಾರಕರಾದ ಶ್ರೀ ಮತಿ ಶಾರದಮ್ಮನವರು ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀ ಮತಿ ಗೀತಾ ಮುಖ್ಯ ಶಿಕ್ಷಕರಾದ ನಾಗರತ್ನಮ್ಮ ಹಾಗೂ ಅರೋಗ್ಯಧಿಕಾರಿ ದಿಲೀಪ್ ರವರು  ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ಅಂಗನವಾಡಿ ಕಾರ್ಯಕರ್ತೆ ಗಂಗಮ್ಮ ಸ್ವಾಗತ ಕೋರಿದರು. ಶ್ರೀಮತಿ ರಂಜಿತಾರವರು ಪೋಷಣ್ ಪಾಕ್ವಾಡ್ ದ ಮಹತ್ವವನ್ನು ತಿಳಿಸಿ ಸ್ಥಳೀಯವಾಗಿ ಸಿಗುವ ಆಹಾರಗಳಾದ ಸೊಪ್ಪು ತರಕಾರಿ ಸಿರಿಧಾನ್ಯಗಳ ಬಳಕೆ ಮಾಡುವುದರಿಂದ ಅಪೌಷ್ಠಿಕತೆ ಹೋಗಲಾಡಿಸಲು ಮಾರ್ಗಸೂಚಿ ನೀಡಿದರು. ತಾಲೋಕ್ ಪೋಷಣ್ ಸಂಯೋಜಕರಾದ ಸಂತೋಷರವರು ಮಕ್ಕಳ ತೂಕ- ಎತ್ತರ ಹಾಗೂ ಸಮುದಾಯದ ಫಲಾನುಭವಿಗಳಿಗೆ ಪೋಷಣ್ ಪಕ್ವಾಡ್ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಕಾರ್ಯಕರ್ತೆಯಾದ ಸುಮಲತಾ ವಂದಸಿದರು. ಕಾರ್ಯಕ್ರಮದಲ್ಲಿ ಮತಿಘಟ್ಟ ವೃತ್ತದ ಎಲ್ಲಾ ಕಾರ್ಯಕರ್ತೆಯರು ಭಾಗವಹಿಸಿದ್ದರು.