ವಿಷಯಕ್ಕೆ ಹೋಗಿ

ಪಟ್ಟಣದೆಲ್ಲೆಡೆ ಗೆಲುವಿನ ಲೆಕ್ಕಾಚಾರ ಯಾರು ಗೆಲ್ಲುತ್ತಾರೆಂಬುದೇ ಕುತೂಹಲ

ಗ್ರಾಮ ಪಂಚಾಯ್ತಿಯ ಚುನಾವಣೆಯ ಮತದಾನ ಮಂಗಳವಾರ ಮುಗಿದಿದ್ದು ಚುನಾವಣೆಯ ಕಾವು ಸ್ವಲ್ಪ ಕಡಿಮೆಯಾದಂತೆ ಕಂಡರೂ ಸಹ ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಯಾರು ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ. ಅಭ್ಯರ್ಥಿಗಳ ಸೋಲುಗೆಲುವಿನ ಫಲಿತಾಂಶ ಇದೇ ೫ ರ ಶುಕ್ರವಾರದಂದು ಪ್ರಕಟವಾಗಲಿದ್ದು, ಅಲ್ಲಿಯವರೆಗೂ ಚರ್ಚೆಗೆ ದಾರಿ ಮಾಡಿಕೊಟ್ಟಿದೆ.
ಹುಳಿಯಾರು ಗ್ರಾ.ಪಂ.ಚುನಾವಣೆಯಲ್ಲಿ ಯಾರುಗೆಲ್ಲುತ್ತಾರೆಂಬುದರ ಬಗ್ಗೆ ಬುಧವಾರ ಬೆಳಿಗ್ಗೆ ಬಸ್ ನಿಲ್ದಾಣ ಸ್ವಚ್ಚಗೊಳಿಸಲು ಬಂದ ಪೌರಕಾರ್ಮಿಕರಲ್ಲೂ ಕುತೂಹಲ ಮೂಡಿಸಿದ್ದು ಅವರುಗಳು ಸಹ ಚರ್ಚೆಯಲ್ಲಿ ತೊಡಗಿರುವುದು.
ಹುಳಿಯಾರು ಗ್ರಾ.ಪಂ. ಚುನಾವಣೆ ಹಿಂದೆಂದಿಗಿಂತಲೂ ಈ ಬಾರಿ ಹೆಚ್ಚು ಕುತೂಹಲ ಕೆರಳಿಸಿದ್ದು ಒಟ್ಟು ೧೬೨ ಅಭ್ಯರ್ಥಿಗಳು ಕಣದಲಿದ್ದು ೩೯ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಡೆದಿದೆ. ಚುನಾವಣೆಗಾಗಿ ಕಳೆದೊಂದು ತಿಂಗಳಿನಿಂದ ನಾನಾರೀತಿಯಲ್ಲಿ ತೊಡಗಿಕೊಂಡಿದ್ದ ಅಭ್ಯರ್ಥಿಗಳು ಸದ್ಯ ನಿರಾಳರಾಗಿದ್ದಾರೆ.
ಲೆಕ್ಕಾಚಾರ: ಚುನಾವಣೆಗೆ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಅವರ ಪರ ಬೆಂಬಲಿಗರು ತಾವು ಮಾಡಿದ ಖರ್ಚು ವೆಚ್ಚ ಯಾವರೀತಿ ಗೆಲುವು ತರಲಿದೆ ಎಂಬ ಲೆಕ್ಕಾಚಾರದಲ್ಲಿ ತೊಡಗಿದರೆ. ಮತದಾರರು ತಾವು ಬೆಂಬಲಿಸಿದ ಅಭ್ಯರ್ಥಿ ಸೋಲುವನೋ , ಗೆಲ್ಲುವನೋ ಎಂದು ಗುಣಾಕಾರ, ಭಾಗಾಕಾರದ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.
ಮುಂಜಾನೆಯಿಂದ ನಿನ್ನೆಯ ಬ್ಲಾಕ್ ವಾರು ಮತಚಲಾವಣೆಯ ಪಟ್ಟಿ ಕೈಯ್ಯಲಿಡಿದಿರುವ ಕೆಲ ಅಭ್ಯರ್ಥಿಗಳು ಎಲ್ಲರ ಅಭಿಪ್ರಾಯ ಸಂಗ್ರಹಿಸಿ ನಾವಿಗಾಗಲೇ ಗೆಲುವಿನ ಹಾದಿಯಲ್ಲಿದ್ದೇವೆಂದು ಬೀಗುತ್ತಿದ್ದಾರೆ. ಕಾಫಿ,ಟೀ ಅಂಗಡಿಯಿಂದ ಹಿಡಿದು ಕ್ಷೌರದ ಅಂಗಡಿಯವರೆಗೆ, ಜನನಿಬಿಡ ಪ್ರದೇಶದಿಂದ ಹಿಡಿದು ಅರಳಿಕಟ್ಟೆಯವರೆಗೆ ಎಲ್ಲೆಂದರೆಲ್ಲಿ ಚುನಾವಣೆಯ ವಿಚಾರವೇ ಮಾತಾಗಿದೆ. ಈಗಾಗಲೇ ಅಭ್ಯರ್ಥಿಗಳು ಮತದಾರರಿಗೆ ಖರ್ಚು ಮಾಡಿರುವ ಆಧಾರದ ಮೇಲೆ ಸೋಲುಗೆಲುವಿನ ನಿಷ್ಕರ್ಷೆಯಾಗುತ್ತಿದ್ದು, ಇಂತವರೇ ಗೆಲ್ಲುತ್ತಾರೆಂಬ ಬೆಟಿಂಗ್ ಕೂಡ ಶುರುವಾಗಿದೆ.
ಕೆಲವರು ಈಗಾಗಲೇ ಗೆದ್ದಿದ್ದೇವೆಂದು ಬೀಗುತ್ತಿದ್ದು ಎಲ್ಲಾ ಅವರವರ ಊಹೆಗೆ ತಕ್ಕಂತೆ ಚರ್ಚಿಸುತ್ತಿದ್ದಾರೆ.ಕೆಲವರಿಗೆ ತಮ್ಮ ಹಿನ್ನಡೆ ಈಗಾಗಲೇ ಅರಿವಿಗೆ ಬಂದಿದ್ದು ಫಲಿತಾಂಶ ಬರುವವರೆಗೂ ಇಲ್ಲಿರುವುದೇ ಬೇಡವೆಂದು ಸ್ಥಳಬಿಟ್ಟು ಬೇರೆಡೆಗೆ ತೆರಳಿದ್ದಾರೆ. ಮತ ಎಣಿಕೆ ದಿನಕ್ಕೆ ಬೆಂಬಲಿಗರೊಂದಿಗೆ ತೆರಳ ಬೇಕಿರುವ ಅಭ್ಯರ್ಥಿಗಳು ಅನಿವಾರ್ಯವಾಗಿ ಆ ದಿನದ ಖರ್ಚುವೆಚ್ಚವನ್ನು ಭರಿಸಬೇಕಿದ್ದು ಸೋತರೆ ಹೇಗಪ್ಪ ಎಂಬ ಚಿಂತೆ ಕೆಲವರಲ್ಲಿ ಮನೆಮಾಡಿದೆ.

ಕಳೆದ ಬಾರಿಗಿಂತ ಈ ಬಾರಿ ಮತದಾನದಲ್ಲಿ ಏರಿಕೆಯಾಗಿದ್ದು ನೂತನವಾಗಿ ಯಾರು ಆಯ್ಕೆಯಾಗುತ್ತಾರೆ ಎಂಬುದನ್ನು ಮತದಾರರು ಮತಪೆಟ್ಟಿಗೆಯಲ್ಲಿ ಗೌಪ್ಯವಾಗಿಟ್ಟಿದ್ದಾರೆ. ಫಲಿತಾಂಶಕ್ಕೆ ಇನ್ನೊಂದು ದಿನವಷ್ಟೆ ಬಾಕಿ ಉಳಿದಿದ್ದು ಸೋಲುಗೆಲುವಿನ ನಿರ್ಧಾರವಾಗಲಿದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...