ವಿಷಯಕ್ಕೆ ಹೋಗಿ

ಶ್ರದ್ಧಾಭಕ್ತಿಯಿಂದ ನಡೆದ ಹೊಸಕೆರೆ ಉಡುಸಲ್ಲಮ್ಮ ದೇವಿ ಅಗ್ನಿ ಕೊಂಡೋತ್ಸವ

ಹುಳಿಯಾರು:ಸಮೀಪದ ಹಂದನಕೆರೆ ಹೋಬಳಿಯ ಹೊಸಕೆರೆಯಲ್ಲಿ ಪ್ರತಿ ವರ್ಷದಂತೆ ಗ್ರಾಮದೇವತೆ ಉಡುಸಲ್ಲಮ್ಮ ದೇವಿಯ ಅಗ್ನಿ ಕೊಂಡೋತ್ಸವ ಶ್ರದ್ಧಾಭಕ್ತಿಯಿಂದ ನಡೆಯಿತು.


       ಕೊಂಡೋತ್ಸವದ ಅಂಗವಾಗಿ ಹೊಸಕೆರೆಯಮ್ಮನಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.ಕೆರೆ ಅಂಗಳದಲ್ಲಿ ಉಡುಸಲ್ಲಮ್ಮದೇವಿಯೊಂದಿಗೆ ಬೆಳಗುಲಿ ರಂಗನಾಥ ಸ್ವಾಮಿ,ಕೆಂಚರಾಯಸ್ವಾಮಿ ,ಜಾಲಿಮರದಮ್ಮ,ಹೊಸಕೆರೆಯಮ್ಮನ ಪರಿವಾರ ದೇವತೆಗಳಾದ ಪಾತಪ್ಪ,ವೀರಣ್ಣ,ಕೆಂಪಣ್ಣ ಸ್ವಾಮಿಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ಕಳಸ ಹೊತ್ತ ಬಾಲಕಿಯ ಪೂಜೆ ಸಲ್ಲಿಸಿದ ನಂತರ ಆಗಮಿಸಿದ್ದ ದೇವರುಗಳೊಂದಿಗೆ ನಡೆಮುಡಿಯಲ್ಲಿ ಎಲ್ಲಾ ದೇವರುಗಳನ್ನು ಅಗ್ನಿಕೊಂಡದ ಬಳಿ ಕರೆತರಲಾಯಿತು.


ಅಗ್ನಿಕೊಂಡಕ್ಕೆ ಪೂಜಾ ಸಲ್ಲಿಸಿದ ನಂತರ ವಾದ್ಯಮೇಳದ ಹಿಮ್ಮೇಳದೊಂದಿಗೆ ನಿಗಿನಿಗಿಸುವ ಕೆಂಡದ ಮೇಲೆ ಮೊದಲು ದೇವರ ಬಸವ ನಂತರ ಕಳಸ ಹೊತ್ತ ಬಾಲಕಿ ಹಾದ ನಂತರ ಉಡುಸಲ್ಲಮ್ಮನೊಟ್ಟಿಗೆ ಎಲ್ಲಾ ದೇವರುಗಳ,ಕೆಂಚರಾಯಗಳನ್ನು ಕೆಂಡ ಹಾಯಿಸಲಾಯಿತು.ಮೊದಲೇ ಪಟ್ಟಿಮಾಡಿದ ಸೀಮಿತ ಸಂಖ್ಯೆಯ ಭಕ್ತರು ಕೆಂಡ ಸೇವೆಗೈದು ಹರಕೆ ಒಪ್ಪಿಸಿದರು.ಬೆಳಿಗ್ಗೆ ೧೧ ಕ್ಕೆ ಪ್ರಾರಂಭವಾದ ಕೆಂಡ ಸೇವೆ ನೋಡುವ ಸಲುವಾಗಿಯೇ ಅಪಾರ ಭಕ್ತರು ಬಿಸಿಲ್ಲನ್ನು ಲೆಖ್ಖಿಸದೆ ಕಾದು ನಿಂತಿದ್ದರು.ನಿಗಿನಿಗಿಸುವ ಕೆಂಡದ ಮೇಲೆ ಹಾಯುವುದನ್ನು ನೋಡಿ ಭಕ್ತಪರವಶರಾದರು.


ಕೆಂಡದ ಸಮಯದಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ಪೋಲಿಸರು ಹಾಗೂ ದೇವಾಲಯ ಸಮಿತಿಯವರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದರು.ಅಪಾರ ಸಂಖ್ಯೆಯಲ್ಲಿ ಆಗಮಿಸಿದ್ದ ಭಕ್ತರಿಗೆ ಹೊಸಕೆರೆ ಗ್ರಾಮಸ್ಥರಿಂದ ಅನ್ನ ಸಂತರ್ಪಣೆ ನಡೆಯಿತು.


ದೇವಾಲಯ ಸಮಿತಿಯ ಕನ್ವೀನರ್ ಭರತ್,ಪಟೇಲ ಸುರೇಶ್,ಪುಟ್ಟಶಾಮಯ್ಯ,ಯಜಮಾನರುಗಳಾದ ಜಯರಾಮಯ್ಯ,ಕರಿಯಪ್ಪ,ರಘು ಸೇರಿದಂತೆ ಮುದ್ದೇನಹಳ್ಳಿ,ಬಯಲಪ್ಪನ ಮಠ,ತಾರೀಕಟ್ಟೆ, ತಾಂಡ್ಯ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು.


ವೈಫಲ್ಯ:ಅನಾದಿ ಕಾಲದಿಂದಲೂ ನಡೆಯುತ್ತಿದ್ದ ಕೆಂಡದ ಕಾರ್ಯಕ್ರಮಕ್ಕೆ ಇದೇ ಮೊದಲ ಬಾರಿ ತಾಲ್ಲೂಕ್ ಆಡಳಿತದಿಂದ ಒಪ್ಪಿಗೆ ಪಡೆಯಬೇಕಾಯಿತು.ಸರ್ಕಾರಿ ಆದೇಶದಂತೆ ಪೋಲಿಸರು ಆಗಮಿಸಿದ್ದರಾದರೂ ಮುಂಜಾಗ್ರತೆಯಾಗಿ ಸ್ಥಳದಲ್ಲಿರಬೇಕಾದ ಅಗ್ನಿಶಾಮಕ ದಳ ಹಾಗೂ ಸಂಚಾರಿ ತುರ್ತು ವಾಹನದ ಏರ್ಪಾಡಿನ ಬಗ್ಗೆ ತಾಲ್ಲೂಕ್ ಆಡಳಿತ ಗಮನಹರಿಸಿರಲಿಲ್ಲ. ಅಕಸ್ಮಾತ್ ಅಗ್ನಿಕೊಂಡ ಹಾಯುವಾಗ ಏನಾದರೂ ಹೆಚ್ಚುಕಮ್ಮಿಯಾಗಿ ಅನಾಹುತವಾಗಿದ್ದರೆ ಯಾರು ಹೊಣೆ ಎನ್ನುವ ಮಾತು ಕೇಳಿಬಂತು.
----------------------------------------
ಪ್ರತಿ ವರ್ಷವೂ ಗ್ರಾಮದೇವಿಯ ಸನ್ನಿಧಾನದಲ್ಲಿ ಜಾತ್ರಾ ಸಮಯದಲ್ಲಿ ಕೆಂಡ ಹಾಯುವುದು ನಡೆಯುತ್ತವೆ.ಕೆಂಡ ಹಾಯ್ದರೆ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ ಎನ್ನುವ ಕಾರಣಕ್ಕಾಗಿ ಈ ಆಚರಣೆ ನಡೆಯುತ್ತಿದ್ದು ಇದೇ ಮೊದಲ ಬಾರಿಗೆ ತಾಲ್ಲೂಕ್ ಆಡಳಿತ ಹಾಗೂ ಪೋಲಿಸರು ಮಧ್ಯಸ್ಥಿಕೆ ವಹಿಸಿ ಎಲ್ಲರನ್ನೂ ಕೆಂಡ ಹಾಯಿಸದೆ ಸೀಮಿತ ಯುವಕರನ್ನು ಮಾತ್ರ ಕೆಂಡ ಹಾಯಿಸಲಾಯಿತು.ಇದರಿಂದಾಗಿ ಹರಕೆ ಹೊತ್ತ ಹಲವರು ನಿರಾಶರಾಗಿ ಮರಳಬೇಕಾಯಿತು :ಸಿಂದೂಧರ,ಗ್ರಾಮದ ಯುವಕ

-----------------------

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹುಳಿಯಾರು ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ 96.59 ಶೇಕಡವಾರು ಫಲಿತಾಂಶ

ಹುಳಿಯಾರು-ಕೆಂಕೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ-ವಾಣಿಜ್ಯ- ವಿಜ್ಞಾನ ವಿಭಾಗದಿಂದ ಒಟ್ಟು 272 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಆ ಪೈಕಿ 263 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇಕಡ 96.59 ಫಲಿತಾಂಶ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ 98 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 99 % ಫಲಿತಾಂಶ ಲಭಿಸಿದೆ. ಕಲಾವಿಭಾಗದಲ್ಲಿ 92 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು 88 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡ 95.65 % ಫಲಿತಾಂಶ ಲಭಿಸಿದರೆ, ವಿಜ್ಞಾನ ವಿಭಾಗದಲ್ಲಿ 82 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 78 ವಿದ್ಯಾರ್ಥಿಗಳು ಉತ್ತೀರ್ಣರಾಗಿ 95.12 ಶೇಕಡವಾರು ಫಲಿತಾಂಶ ಲಭಿಸಿದೆ. Rakesh ದಿವ್ಯಶ್ರೀ ವಾಣಿಜ್ಯ ವಿಭಾಗದಲ್ಲಿ ದಿವ್ಯಶ್ರೀ ಹಾಗೂ ರಾಕೇಶ್ 577 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನಕ್ಕೆ ಭಾಜನರಾದರೆ, Dayana ಹಾಗೂ ವೆಂಕಟೇಶಮೂರ್ತಿ 574 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಮತ್ತು ದಿಲೀಪ್ ಹಾಗೂ ವೀಣಾ 572 ಅಂಕಗಳಿಸುವ ಮೂಲಕ ತೃತೀಯ ಸ್ಥಾನ ಪಡೆದಿದ್ದಾರೆ. ಮಹಾಲಕ್ಷ್ಮಿ ಕಲಾವಿಭಾಗದಲ್ಲಿ ವಿದ್ಯಾರ್ಥಿನಿಯರದ್ದೇ ಮೇಲುಗೈಯಾಗಿದ್ದು ಮಹಾಲಕ್ಷ್ಮಿ 575 ಅಂಕಗಳಿಸುವ ಮೂಲಕ ಪ್ರಥಮ ಸ್ಥಾನ ಪಡೆದರೆ, 570 ಅಂಕಗಳಿಸಿರುವ ಗೀತಾ ಹಾಗೂ ರೂಪ ದ್ವಿತೀಯ ಸ್ಥಾನ ಹಾಗೂ 564 ಅಂಕ ಗಳಿಸಿದ ಕಾವ್ಯ ತೃತೀಯ ಸ್...

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...