ವಿಷಯಕ್ಕೆ ಹೋಗಿ

ಹುಳಿಯಾರು: ಯುಗಾದಿಗೆ ಸಿದ್ಧತೆ ಬಲು ಜೋರು


ಹುಳಿಯಾರು:ಬೆಲೆ ಏರಿಕೆ ನಡುವೆಯೂ ಪಟ್ಟಣದಲ್ಲಿ ಯುಗಾದಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲು ಸಿದ್ದತೆ ನಡೆದಿದ್ದು ಹಬ್ಬದ ಗೌಜು, ಗದ್ದಲದ ಮಧ್ಯೆ ಮಂಗಳವಾರ ನಡೆದ ಹಬ್ಬದ ಸಂತೆಯಲ್ಲಿ ಅಗತ್ಯ ವಸ್ತುಗಳಖರೀದಿ ಭರಾಟೆ ಜೋರಾಗಿ ಸಾಗಿತ್ತು.
ಹುಳಿಯಾರಿನಲ್ಲಿ ನಡೆದ ಹಬ್ಬದ ಸಂತೆಯಲ್ಲಿ ಯುಗಾದಿ ಹಬ್ಬಕ್ಕೆ ಬೇಕಾದ ದಿನಸಿ ಕೊಳ್ಳಲು ಮುಗಿಬಿದ್ದ ಜನತೆ
         ದಿನ ಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದರೂ ಸಹ ಹಬ್ಬಕ್ಕೆ ಬೇಕಾದ ದಿನಸಿ,ತರಕಾರಿ,ಹೂವು,ಹಣ್ಣು ಮೊದಲಾದವುಗಳನ್ನು ಕೊಳ್ಳಲು ಸಾಕಷ್ಟು ಜನ ಜಮಾಯಿಸಿದ್ದು ಸಂತೆ ಜನರಿಂದ ಗಿಜಗುಡುತಿತ್ತು.
        ಪಟ್ಟಣದ ಗಾಂಧಿಪೇಟೆ,  ಆಂಜನೇಯಸ್ವಾಮಿ ದೇವಸ್ಥಾನದ ಮುಂಭಾಗದ ರಸ್ತೆಯಲ್ಲಿ ಸಂತೆ ಸೇರಿದ್ದು ಎಲ್ಲಿ ಕಣ್ಣು ಹಾಯಿಸಿದರೂ ಜನರೇ ಕಾಣಿಸುತ್ತಿದ್ದರು. ಸಂತೆಯಲ್ಲಿನ ದಿನಸಿ ಅಂಗಡಿಗಳು, ಬಟ್ಟೆ ಅಂಗಡಿಗಳ ಬಳಿ ಹೆಚ್ಚು ಜನ ಜಮಾಯಿಸಿದ್ದರಲ್ಲದೆ, ತರಕಾರಿ ಅಂಗಡಿ, ಹಣ್ಣು, ಹೂ ಅಂಗಡಿಗಳಲ್ಲೂ ಸಹ ಮಾರಾಟ ಜೋರಾಗಿತ್ತು. ಯುಗಾದಿ ಹಬ್ಬದಂದು ಹೊಸಬಟ್ಟೆ ತೊಡುವ ಸಂಪ್ರದಾಯ ಗ್ರಾಮೀಣ ಭಾಗದಲ್ಲಿ ಆಚರಣೆಯಲ್ಲಿದ್ದು ಕಡೇಪಕ್ಷ ಹಬ್ಬದ ದಿನ ಉಡುದಾರವನ್ನಾದರೂ ತೊಡಬೇಕೆನ್ನುವ ಆಚರಣಿಯಿಂದಾಗಿ ಉಡುದಾರ ಮಾರುವವರಿಗೂ ಬೇಡಿಕೆ ಹೆಚ್ಚಾಗಿತ್ತು.
ಯುಗಾದಿ ಉಡುದಾರ : ಹಬ್ಬದ ಅಂಗವಾಗಿ ಉಡುದಾರದ ವ್ಯಾಪಾರ ತಕ್ಕಮಟ್ಟಿಗಿದ್ದು, ಕೆಂಪು ಹಾಗೂ ಕಪ್ಪು ಬಣ್ಣದ ಉಡುದಾರ ಮಾರಿಗೆ ೫ ರೂ ನಂತೆ ಮಾರಾಟ ಮಾಡುತ್ತಿದ್ದರು. ಸಂತೆ ಸೇರಿದಂತೆ ಪಟ್ಟಣದ ಬಸ್ ನಿಲ್ದಾಣ ಹಾಗೂ ಪ್ರಮುಖ ಬೀದಿಗಳಲ್ಲಿ ಯುಗಾದಿ ಉಡುದಾರ ಎಂದು ಕೂಗುತ್ತಾ ವ್ಯಾಪಾರ ಮಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
         ಯುಗಾದಿಗೆ ಹೊಸಬಟ್ಟೆ ತರುವ ಪರಿಪಾಠವಿರುವುದರಿಂದ ಬಟ್ಟೆ ಅಂಗಡಿಗಳಲ್ಲಿ ಜನ ಜಂಗುಳಿ ಕಂಡುಬಂತು. ರಸ್ತೆಗಳಲ್ಲಿಯೇ ರಾಶಿ ರಾಶಿ ಬಟ್ಟೆಗಳ ಖರೀದಿ ಸಹ ಭರ್ಜರಿಯಾಗಿ ನಡೆಯುತ್ತಿತ್ತು. ರಂಗನಾಥಸ್ವಾಮಿ ದೇವಾಲಯ ರಸ್ತೆ,ಬಸ್ ನಿಲ್ದಾಣದಲ್ಲಿ,ಆಸ್ಪತ್ರೆ ರಸ್ತೆಯಲ್ಲಿ ಭರ್ಜರಿ ಬಟ್ಟೆ ವ್ಯಾಪಾರ ನಡೆಯುತ್ತಿದ್ದು ಬಟ್ಟೆ ಖರೀದಿಗೆ ಜನ ಮುಗಿಬಿದ್ದ ದೃಶ್ಯ ಕಂಡುಬಂತು.

         ಯುಗಾದಿಯೆಂದರೆ ಒಬ್ಬಟ್ಟಿನ ಹಬ್ಬವಾಗಿದ್ದು ಬೆಲ್ಲ, ಬೇಳೆಗಳ ಬೆಲೆ ದುಪ್ಪಟ್ಟಾಗಿದ್ದರೂ ಸಹ ದಿನಸಿಅಂಗಡಿಗಳಲ್ಲಿ ಜನ ಸಾಲುಗಟ್ಟಿನಿಂತಿದ್ದರು.ಸಂತೆಯಲ್ಲಿ ಹೂವಿನ ವ್ಯಾಪಾರ ಜೋರಾಗಿದ್ದು ಮಾರು ಹೂವಿಗೆ ೫೦ ರಿಂದ ೬೦ ರೂ ಬೆಲೆಯಿತ್ತು. ಹಣ್ಣು ತರಕಾರಿ ಖರೀದಿ ಸುಮಾರಿಗಿತ್ತು.
           ಪ್ರತಿವರ್ಷವೂ ಹಬ್ಬದ ಹಿಂದಿನ ದಿನ ಬೆಂಗಳೂರಿನಲ್ಲಿ ಕೆಲಸದಲ್ಲಿ ತೊಡಗಿಕೊಂಡಿರುವವರು ಹಬ್ಬಕ್ಕೆ ಎರಡುಮೂರು ದಿನ ರಜಾ ಹಾಕಿ ಬರುವುದಿದ್ದು ಆದರೆ ಈ ಬಾರಿ ಹಬ್ಬ ಬುಧವಾರ ಬಂದಿರುವುದರಿಂದ ಪಟ್ಟಣದಲ್ಲಿ ಉದ್ಯೋಗದಲ್ಲಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸದಿರುವುದರಿಂದ ಬಸ್ ಗಳಲ್ಲಿ ಅಂತಹ ರಶ್ ಕಂಡುಬರಲಿಲ್ಲ.
ಹುಳಿಯಾರಿನಲ್ಲಿ ಯುಗಾದಿ ಹಬ್ಬಕ್ಕಾಗಿ ನಡೆದಿರುವ ಹೂವಿನ ಭರ್ಜರಿ ವ್ಯಾಪಾರ.
         ಯುಗಾದಿ ಎಂದರೆ ಎಣ್ಣೆ ಸ್ನಾನಮಾಡುವುದು ಸಂಪ್ರದಾಯವಾಗಿದ್ದು ಈ ಬಾರಿ ಹಬ್ಬಕ್ಕೆಂದೆ ಎಲ್ಲಾ ರಾಜಕೀಯ ಪಕ್ಷಗಳವರು ಕಳೆದ ಎರಡುಮೂರು ದಿನಗಳಿಂದಲೂ ಟ್ಯಾಂಕರ್ ಗಳಲ್ಲಿ ನೀರು ಪೂರೈಸುತ್ತಿದಿದ್ದು ನೀರಿನ ಸಮಸ್ಯೆ ಅಷ್ಟಾಗಿ ಬಾಧಿಸಲಿಲ್ಲ.
---------------------------


ದಿನೆದಿನೇ ಉಡುದಾರದ ವ್ಯಾಪಾರ ಇಳಿಮುಖವಾಗುತ್ತಿದ್ದು ಹಬ್ಬದ ದಿನದಲ್ಲಿ ದಿನಕ್ಕೆ ಮೂರ್ನಾಲ್ಕು ಸಾವಿರ ವ್ಯಾಪಾರ ಮಾಡುತ್ತಿದ್ದವರು ಇಂದು ಸಾವಿರ ರೂಪಾಯಿ ಮಾಡುವುದು ಕಷ್ಟಕರವಾಗಿದೆ. ಲಾಭವೋ, ಲುಕ್ಸಾನೋ ಹಿಂದಿನಿಂದ ಮಾಡಿಕೊಂಡು ಬಂದಿರುವ ಪದ್ದತಿ ಬಿಡಬಾರದೆಂದು ಉಡುದಾರದ ವ್ಯಾಪಾರ ಮುಂದುವರಿಸಿಕೊಂಡು ಬರುತ್ತಿದ್ದೆವೆ:ಕಂಚೀಪುರದ ರಾಜಣ್ಣ,ಉಡುದಾರ ವ್ಯಾಪಾರಿ

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...