ವಿಷಯಕ್ಕೆ ಹೋಗಿ

ಪ್ರಧಾನಿ ಮೋದಿ ಜೊತೆ ಗಣರಾಜ್ಯೋತ್ಸವ ಪೆರೇಡ್ ವೀಕ್ಷಿಸಲು ಹುಳಿಯಾರಿನ ಯಶಸ್ ಗೆ ಆಹ್ವಾನ

ಹಳ್ಳಿ ಹುಡುಗನೊಬ್ಬ ದಿಲ್ಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡನ್ನು ಪ್ರಧಾನಿ ಮೋದಿ ಅವರೊಂದಿಗೆ ವೀಕ್ಷಿಸಲಿದ್ದಾನೆ.

         ಇದೇ ಜನವರಿ 26ರಂದು ದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ವಿದೇಶಿ ಗಣ್ಯರ ಉಪಸ್ಥಿತಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡಿನಲ್ಲಿ ಪಾಲ್ಗೊಳ್ಳುವ ಅವಕಾಶ ಹುಳಿಯಾರಿನ ತಿಮ್ಮನಹಳ್ಳಿಯ ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿ ಯಶಸ್‌ಗೆ ದೊರೆತಿದೆ.


         ಹೌದು...ಯಶಸ್ ಪರಿಕ್ರಮಿಸಿರುವ ಯಶಸ್ಸಿನ ಹಾದಿ ಅವನನ್ನು ಪ್ರಧಾನಮಂತ್ರಿ ಬಾಕ್ಸ್ ನಲ್ಲಿ ಕುಳಿತು ಗಣರಾಜ್ಯೋತ್ಸವ ಪೆರೇಡ್ ವೀಕ್ಷಣೆ ಮಾಡಲು ಅನುವು ಮಾಡಿಕೊಟ್ಟಿದೆ.

        ಹುಳಿಯಾರು ಸಮೀಪದ ಹಳ್ಳಿಗಾಡಿನ ತಿಮ್ಮನಹಳ್ಳಿಯ ಕೃಷಿಕರಾದ ದೇವರಾಜು ಹಾಗೂ ನೇತ್ರಾವತಿ ಪುತ್ರನಾದ ಯಶಸ್ ದೇವರಾಜು ಹುಳಿಯಾರಿನ ವಿದ್ಯಾವಾರಿಧಿ ಇಂಟರ್ ನ್ಯಾಷನಲ್ ಶಾಲೆಯ ವಿದ್ಯಾರ್ಥಿಯಾಗಿ ಸಾಧಿಸಿದ್ದು ಬಹಳ. ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿ ಯಶಸ್ ಕಳೆದ ಸಾಲಿನ ಸಿಬಿಎಸ್ಸಿ ಹತ್ತನೇ ತರಗತಿಯಲ್ಲಿ ದೇಶದಲ್ಲಿಯೇ ಎರಡನೇ ಸ್ಥಾನ ಪಡೆದು ದಕ್ಷಿಣ ವಲಯ ಹಾಗೂ ರಾಜ್ಯಕ್ಕೆ ಪ್ರಥಮನಾಗಿ ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಹಾಗೂ ತುಮಕೂರು ಜಿಲ್ಲೆ ಸೇರಿದಂತೆ ಹುಳಿಯಾರಿನ ವಿದ್ಯಾವಾರಿಧಿ ಶಾಲೆಗೆ ಕೀರ್ತಿ ತಂದಿದ್ದು ಇದೀಗ ಯಶೋಗಾಥೆ. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಹಿನ್ನಲೆಯಲ್ಲಿ ಮಾನವ ಸಂಪನ್ಮೂಲ ಸಚಿವಾಲಯದಿಂದ ಆತನಿಗೆ ಈ ವಿಶೇಷ ಆಹ್ವಾನ ಬಂದಿದೆ.
ಗಣರಾಜ್ಯೋತ್ಸವ ಪೆರೇಡ್ ಗೆ ಪಾಲ್ಗೊಳ್ಳಲು ಮಾನವ ಸಂಪನ್ಮೂಲ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯಿಂದ ಬಂದಿರುವ ಪತ್ರ.
            ಈ ಬಗ್ಗೆ ವಿದ್ಯಾವಾರಿಧಿ ಶಾಲೆಯ ಕಾರ್ಯದರ್ಶಿ ಕವಿತಾ ಕಿರಣ್ ಮಾತನಾಡಿ ಪ್ರತಿ ವರ್ಷ ದೇಶದ 100 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಆಹ್ವಾನ ಬರುತ್ತದೆ.ಇದೇ ಮೊದಲ ಬಾರಿಗೆ ನಮ್ಮ ಶಾಲೆಯಲ್ಲಿ ಓದಿದ ವಿದ್ಯಾರ್ಥಿಯ ಯಶಸ್ ಗೆ ಭಾಗವಹಿಸಲು ಆಹ್ವಾನ ಬಂದಿರುವುದು ಪ್ರತಿಭಾವಂತ ವಿದ್ಯಾರ್ಥಿಗಳ ಸಾಧನೆಯನ್ನು ಪ್ರೋತ್ಸಾಹಿಸಲು ಅವಕಾಶವಾದಂತಾಗಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಯಶಸ್ ತಂದೆ ದೇವರಾಜು ಕಳೆದ ಹತ್ತು ವರ್ಷದಿಂದ ಹಾಸಿಗೆ ಹಿಡಿದಿದ್ದು ತಾಯಿಯೇ ಎಲ್ಲ ಆಗುಹೋಗುಗಳನ್ನು ಗಮನಿಸುತ್ತಿದ್ದು ಇದರೊಟ್ಟಿಗೆ ತಾಯಿಯ ಸಹೋದರ ರವೀಂದ್ರ ಮಾರ್ಗದರ್ಶನದಿಂದ ಇಂದು ನಾನು ಈ ಮಟ್ಟಕ್ಕೆ ಏರಲು ಸಾಧ್ಯವಾಗಿದೆ ಎಂದು ಸ್ಮರಿಸುವ ಯಶಸ್ ಈಗ ಬೆಂಗಳೂರಿನ ನಾರಾಯಣ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಾನೆ.
500 ಅಂಕಗಳಿಗೆ 498 ಅಂಕ ಗಳಿಸುವ ಮೂಲಕ ದಕ್ಷಿಣ ವಲಯಕ್ಕೆ ಪ್ರಥಮನಾಗಿರುವ ಯಶಸ್ ಪ್ರಧಾನಮಂತ್ರಿಯೊಂದಿಗೆ ಗಣರಾಜ್ಯೋತ್ಸವ ವೀಕ್ಷಿಸುವ ಅವಕಾಶ ಕೇಂದ್ರಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಮೂಲಕ ಬಂದಿರುವುದು ಆತನ ತಾಯಿ ನೇತ್ರಾವತಿಗೆ ಜೀವನದ ಅತ್ಯಂತ ಖುಷಿಯ ವಿಚಾರವಾಗಿದ್ದು ಗಣರಾಜ್ಯೋತ್ಸವ ಪೆರೇಡ್ ಗೆ ಕೇವಲ ಆತನನ್ನು ಮಾತ್ರ ಆಹ್ವಾನಿಸಿರುವುದರಿಂದ ತಾವು ಸಹ ಆತನ ಜೊತೆಗೆ ಹೋಗಿ ಇದನ್ನು ಸಾಕ್ಷೀಕರಿಸಲು ಸಾಧ್ಯವಾಗುವುದಿಲ್ಲವಲ್ಲ ಎಂಬ ಕೊರಗಿದೆ. ಆದರೂ ಸಹ ಈ ಕ್ಷಣ ಮರೆಯಲಾಗದು ಎನ್ನುತ್ತಾರೆ.



ಕೇವಲ ಶೈಕ್ಷಣಿಕ ಸಾಧನೆಯ ಮೂಲಕವೇ ಹಳ್ಳಿಯಿಂದ ದಿಲ್ಲಿಗೆ ಯಶಸ್ಸಿನ ಪಯಣ ಮಾಡಿರುವ ಯಶಸ್ ಗೆ ದೊರೆತಿರುವ ಅವಕಾಶಕ್ಕೆ ಹುಳಿಯಾರಿನ ಜನತೆ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಜೈಮಿನಿ ಭಾರತ ಕವಿ ಲಕ್ಷ್ಮೀಶನ ದೇವನೂರು

ಜೈಮಿನಿ ಭಾರತ ಕವಿ ಲಕ್ಷ್ಮಿಶನ ಜನ್ಮಸ್ಥಳ ಚಿಕ್ಕಮಗಲೂರು ಜಿಲ್ಲೆಯ ಕಡೂರು ತಾಲ್ಲೂಕಿನ ದೇವನೂರು.ಆದರೆ ಗುಲ್ಬರ್ಗ ಜಿಲ್ಲೆಯ ಸುರಪುರ? ಅನ್ನುವ ವಾದ ಕೂಡ ಇದೆ.ದೇವನೂರೆ ಜನ್ಮಸ್ಥಳ ಅನ್ನುವುದಕ್ಕೆ ಇಲ್ಲಿ ಸಾಕಷ್ಟು ಪುರಾವೆಗಳು ದೊರೆಯುತ್ತದೆ.ಕವಿ ಲಕ್ಷ್ಮಿಶನ ಕಾಲ: ಕ್ರಿ.ಶ. 1550 (ಹದಿನಾರನೆಯ ಶತಮಾನ).ದೇವನೂರಿಗೆ ಅರಸಿಕೆರೆ ಮಾರ್ಗದ ಬಾಣಾವರದಿಂದ ಹೋಗಬಹುದು.ದೂರ 16 ಕಿಮೀ ಆಗತ್ತೆ.ಇಲ್ಲದಿದ್ರೆ ಚಿಕ್ಕಮಗಳೂರುನಿಂದ ಸಖ್ರೆಪಟ್ಣ( ಸಖರಾಯಪಟ್ಟಣ)ದ ಮೂಲಕ ಬೇಕಾದರೂ ಬರಬಹುದು.ದೇವನೂರು ಗ್ರಾಮದಲ್ಲಿ ೧೭ನೇ ಶತಮಾನದ ಲಕ್ಷ್ಮಿಕಾಂತ ದೇವಸ್ಥಾನ ಹಾಗು ೧೩ ನೇ ಶತಮಾನದ ಸಿದ್ದೇಶ್ವರ ದೇವಾಲಯವಿದೆ. ಲಕ್ಷ್ಮಿಕಾಂತ ದೇವರ ಬಗ್ಗೆ ಪೌರಾಣಿಕ ಐತಿಹ್ಯವಿದ್ದು ಅದು ಹೀಗಿದೆ. ಸಹಸ್ರಾರು ವರ್ಷಗಳ ಹಿಂದೆ ಪಾಂದವರು ಅಷ್ವಮೇಧಯಾಗ ಮಾಡುವ ಸಂದರ್ಭದಲ್ಲಿ ಇಂದಿನ ಭದ್ರಾವತಿ ಅಂದಿನ ಭದ್ರನಗರಿಗೆ ಹೋಗುತ್ತಿದ್ದ ವೇಳೆಯಲ್ಲಿ ಹಸುವೋಂದು ಹುತ್ತಕ್ಕೆ ಹಾಲೆರೆಯುತ್ತಿದ್ದನ್ನು ಕಂಡು ಇದೊಂದು ಪುಣ್ಯಕ್ಷೇತ್ರವೆಂದು ಬಗೆದು ಧರ್ಮರಾಜನ ಮೂಲಕ ಶ್ರೀಕೃಷ್ಣನಿಂದ ಲಕ್ಷ್ಮಿಕಾಂತಸ್ವಾಮಿಯ ಸಾಲಿಗ್ರಾಮ ಶಿಲಾಮೂರ್ತಿಯನ್ನು ಸ್ಥಾಪಿಸಲಾಯಿತೆಂದು ಹೇಳಲಾಗುತ್ತದೆ.ಸದ್ಯ ದೇವಾಲಯ ಮುಜರಾಯಿ ಇಲಾಖೆ ಆಡಳಿತದಲ್ಲಿದೆ.ದೇವಾಲಯ ಅತ್ಯಂತ ವಿಸ್ತಾರವಾಗಿದ್ದು ಇಲ್ಲಿ ೧೨ ಜನ ಆಚಾರ್ಯರುಗಳ ಮೂರ್ತಿಗಳಿದೆ.ಗೋಡೆಯ ಮೇಲೆ ದಶಾವತಾರದ ಪೈಂಟಿಂಗ್ಸ್ ಇದೆ.ಇಲ್ಲಿನ ಅರ್ಚಕ ಜಯಸಿಂಹ ಹೇಳುವಂತೆ ಪ್ರತಿ ವರ್ಷ...

ಮಾಡಾಳು ಶ್ರೀಗಳಿಂದ ಹುಳಿಯಾರಿನಲ್ಲಿ ನೂತನ ಪೆಟ್ರೋಲ್ ಬಂಕ್ ಉದ್ಘಾಟನೆ

ಹುಳಿಯಾರು : ತಿರುಮಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಳಿಯಾರು ತಿಮ್ಲಾಪುರ ಗೇಟ್ ಸಮೀಪ ಭಾರತ್‌ ಪೆಟ್ರೋಲಿಯಂ ಅವರ "ತಿರುಮಲ ಫ್ಯೂಯಲ್ಸ್"  ನೂತನ‌ ಪೆಟ್ರೋಲ್ ಬಂಕ್‌ಗೆ ಅರಸೀಕೆರೆ ತಾಲೂಕು ಮಾಡಾಳಿನ ಶ್ರೀ ನಿರಂಜನ ಪೀಠದ ಶ್ರೀ ರುದ್ರಮುನಿ ಮಹಾಸ್ವಾಮಿಗಳು ಚಾಲನೆ ನೀಡಿದರು.                    ಪೆಟ್ರೋಲ್ ಪಂಪ್‌ಗೆ ಚಾಲನೆ ನೀಡಿ  ಮಾತನಾಡಿದ ಅವರು ನೂತನವಾಗಿ ಪೆಟ್ರೋಲ್ ಬಂಕ್ ನಿರ್ಮಾಣವಾಗಿರುವುದು ಈ ಭಾಗದ ಪ್ರಯಾಣಿಕರಿಗೆ ತುಂಬಾ ಅನುಕೂಲಕರವಾಗಿದೆ. ಗ್ರಾಮೀಣ ಭಾಗದಲ್ಲಿ ದ್ವಿಚಕ್ರ ವಾಹನಗಳು, ಟ್ರ್ಯಾಕ್ಟರ್‌ಗಳ ಸಂಖ್ಯೆ ಹೆಚ್ಚಿದ್ದು ಅವರುಗಳಿಗೆ ಹತ್ತಿರದಲ್ಲಿಯೇ ಪೆಟ್ರೋಲ್ ಬಂಕ್ ಸ್ಥಾಪನೆಯಾಗಿರುವುದು ಅನುಕೂಲಕರವಾಗಿದ್ದು ಎಲ್ಲರೂ ಇದರ ಸದುಪಯೋಗ ಪಡಿಸಿಕೊಳ್ಳುವವರ ಮೂಲಕ ಬಂಕ್ ಲಾಭದಾಯಕವಾಗಿ ನಡೆಯುವಂತೆ ನೋಡಿಕೊಳ್ಳಬೇಕಾಗಿದೆ ಎಂದು ಶುಭ ಹಾರೈಸಿದರು.                         ಈ ಸಂದರ್ಭದಲ್ಲಿ ಬಂಕ್ ಮಾಲೀಕರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷರು ಆಗಿರುವ ಬೇಕರಿ ಪ್ರಕಾಶ್, ಕರವೇ ಹುಳಿಯಾರು ಘಟಕದ ಅಧ್ಯಕ್ಷ ಗೌಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಕರವೇ ಗೌರವಾಧ್ಯಕ್ಷ ಗುರುಮೂರ್ತಿ, ಜಿಲ್ಲಾ ಕರವೇ ಉಪಾಧ್ಯಕ್ಷ ಮೆಡ...

ಹುಳಿಯಾರು: ಹನುಮ ಜಯಂತಿ ನಿಮಿತ್ತ ಸೌಹಾರ್ದ ಸಭೆ

ಹುಳಿಯಾರು ಪಟ್ಟಣದಲ್ಲಿ ಹನುಮ ಜಯಂತಿಯನ್ನು ಯಾವುದೇ ಸಮಸ್ಯೆಗೆ ಎಡೆ ಮಾಡಿಕೊಡದಂತೆ ಸೌಹಾರ್ದಯುತವಾಗಿ ಆಚರಿಸಬೇಕೆಂದು ಪಿಎಸೈ ಧರ್ಮಾಂಜಿ ಸೂಚನೆ ನೀಡಿದರು. ಹುಳಿಯಾರು ಪೋಲಿಸ್ ಠಾಣೆಯಲ್ಲಿ ಹನುಮಜ್ಜಯಂತಿ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮಕೈಗೊಳ್ಳುವ ಬಗ್ಗೆ ಇಲಾಖೆಯಿಂದ ಆಯೋಜಿಸಲಾಗಿದ್ದ ಸೌಹಾರ್ದ ಸಭೆಯಲ್ಲಿ ಮಾತನಾಡಿದ ಅವರು ಇದುವರೆಗೂ ಪಟ್ಟಣದಲ್ಲಿ ಎಲ್ಲಾ ಸಮುದಾಯದವರು ಆಚರಿಸಿಕೊಂಡು ಬರುತ್ತಿರುವ ಉತ್ಸವಗಳಲ್ಲಿ ಯಾವುದೇ ಸಮಸ್ಯೆ ಎದುರಾಗಿಲ್ಲ. ಅದೇ ರೀತಿ ಹನುಮ ಜಯಂತಿ ಕಾರ್ಯಕ್ರಮ ಕೂಡ ಎಲ್ಲಾ ಸಮುದಾಯದವರ ಸಹಕಾರದೊಂದಿಗೆ, ಎಲ್ಲರೂ ಪಾಲ್ಗೊಳ್ಳುವ ಮೂಲಕ ಸೌಹಾರ್ದಯುತವಾಗಿ ನಡೆಯಬೇಕೆಂದು ಕೆಲವೊಂದು ಸೂಚನೆಗಳನ್ನು ನೀಡಿದರು.  ಆಯೋಜಕರು ಪೊಲೀಸ್ ಠಾಣೆಗೆ ಕೊಟ್ಟಿರುವ ಮಾರ್ಗದಲ್ಲಿಯೇ ಉತ್ಸವ ನಡೆಸಬೇಕು, ಸಮಯ ಪರಿಪಾಲನೆ ಮಾಡಬೇಕು ಯಾವುದೇ ಪ್ರಚೋದನೆಗೆ ಒಳಗಾಗದೆ ಜಾತಿ ಧರ್ಮದ ಘೋಷಣೆಗಳನ್ನು ಕೂಗದೆ ಶಾಂತಿಯುತವಾಗಿ ಉತ್ಸವ ಸಾಗಲು ಸಹಕರಿಸಬೇಕು ಎಂದರು. ಪಟ್ಟಣದ ಎಲ್ಲಾ ಸಮುದಾಯದ ನಾಗರಿಕರು ಉತ್ಸವ ಹಬ್ಬಗಳನ್ನು ನೆಮ್ಮದಿ ಮತ್ತು ಸಂತೋಷದಿಂದ ಆಚರಿಸುವಂತಾಗಬೇಕು ಎಂಬುದು ಇಲಾಖೆಯ ಆಶಯವಾಗಿದ್ದು. ಆ ನಿಟ್ಟಿನಲ್ಲಿ ಎಲ್ಲರೂ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಮುಸಲ್ಮಾನ ಬಂಧುಗಳು ಸಹ ಮಸೀದಿಯಲ್ಲಿ ಹನುಮ ಜಯಂತಿ ಉತ್ಸವಕ್ಕೆ ಎಲ್ಲರೂ ಸಹಕರಿಸಬ...