ಚಿಕ್ಕನಾಯಕನಹಳ್ಳಿಯಲ್ಲಿ ವಿಶ್ವ ಜನಸಂಖ್ಯಾ ದಿನ ಹಾಗೂ ಡೆಂಗ್ಯೂ ವಿರೋಧಿ ಮಾಸಾಚರಣೆ
ತಾಲೂಕು ಆರೋಗ್ಯ ಇಲಾಖೆ ವತಿಯಿಂದ ಅರಿವು ಕಾರ್ಯಕ್ರಮ
---------------------------
ಹುಳಿಯಾರು : ಚಿಕ್ಕನಾಯಕನಹಳ್ಳಿ ತಾಲೂಕು ಆರೋಗ್ಯ ಇಲಾಖೆ ಹಾಗೂ ಸಾರ್ವಜನಿಕ ಆಸ್ಪತ್ರೆ ಸಹಯೋಗದಲ್ಲಿ ಚಿಕ್ಕನಾಯಕನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಹಾಗೂ ಡೆಂಗ್ಯೂ ವಿರೋಧಿ ಮಾಸಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ವೈದ್ಯರಾದ ಡಾ. ಉಮೇಶ್ ಮಾತನಾಡಿ, ಜನಸಂಖ್ಯೆ ನಿಯಂತ್ರಣದ ಅಗತ್ಯತೆ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಜನಸಂಖ್ಯೆ ನಿಯಂತ್ರಣದಿಂದ ದೇಶ ಆರ್ಥಿಕವಾಗಿ ಸದೃಢವಾಗಬಹುದು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಅವರಲ್ಲಿ ಈ ಕುರಿತು ಜಾಗೃತಿ ಮೂಡಬೇಕು ಎಂದು ಹೇಳಿದರು.
ಆರೋಗ್ಯ ಶಿಕ್ಷಣಾಧಿಕಾರಿಗಳಾದ ಸಿ.ವಿ. ವೆಂಕಟರಾಮಯ್ಯ ಮಾತನಾಡಿ ಪೌಷ್ಟಿಕ ಆಹಾರ ಬಳಕೆ, ರಕ್ತಹೀನತೆ ತಡೆ, ಕುಟುಂಬ ಕಲ್ಯಾಣ ಕ್ರಮಗಳು, ಬಾಲ್ಯವಿವಾಹ ತಡೆ, ಬಾಲ್ಯ ಗರ್ಭಧಾರಣೆ ಕುರಿತಾಗಿ ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. 18 ವರ್ಷದೊಳಗಿನ ಹೆಣ್ಣುಮಕ್ಕಳ ಮತ್ತು 21 ವರ್ಷದೊಳಗಿನ ಗಂಡುಮಕ್ಕಳ ಮದುವೆ ತಪ್ಪು. ದೈಹಿಕ ಆಕರ್ಷಣೆಗೆ ಒಳಗಾಗದೆ, ಜಾಣತನದಿಂದ ಜೀವನ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.
ಹಿರಿಯ ಆರೋಗ್ಯ ಸುರಕ್ಷತಾಧಿಕಾರಿ ವಿಶಾಲಾಕ್ಷಿ ಮಾತನಾಡಿ ವೈಯಕ್ತಿಕ ಸ್ವಚ್ಛತೆ, ದೈಹಿಕ ಹಾಗೂ ಮಾನಸಿಕ ಆರೋಗ್ಯ ಅತ್ಯಂತ ಮುಖ್ಯ. ವಿಶೇಷವಾಗಿ ಹೆಣ್ಣುಮಕ್ಕಳಲ್ಲಿ ಇದರ ಬಗ್ಗೆ ಹೆಚ್ಚು ಎಚ್ಚರತೆ ಇರಬೇಕು ಎಂದು ಹೇಳಿದರು.
ಡೆಂಗ್ಯೂ ತಡೆಯ ಕುರಿತು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಶೇಷಾದ್ರಿ ಮಾತನಾಡಿ ಸೊಳ್ಳೆಗಳಿಂದ ಹರಡುವ ಡೆಂಗ್ಯೂ ಕಾಯಿಲೆ ಬಗ್ಗೆ ಎಲ್ಲರೂ ಎಚ್ಚರಿಕೆಯಿಂದ ಇರಬೇಕು. ಸೊಳ್ಳೆಯ ಉತ್ಪತ್ತಿ ತಡೆಯುವುದು, ಇಡಿಸ್ ಈಜಿಪ್ಟ್ ಸೊಳ್ಳೆಯ ಜೀವನ ಚಕ್ರ ತಿಳಿದುಕೊಳ್ಳುವುದು ಅಗತ್ಯ. ಮನೆಯ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪರಮೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ