ಎಳ್ಳೇನಹಳ್ಳಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತಾ ಶಿಬಿರ: ಡಿಜಿಟಲ್ ವಂಚನೆ ಬಗ್ಗೆ ಮಾಹಿತಿಹುಳಿಯಾರು : ಸರ್ಕಾರದ ಯೋಜನೆಗಳ ನೇರ ನಗದು ವರ್ಗಾವಣೆ (ಡಿಬಿಟಿ) ಲಾಭ ಪಡೆಯಲು ಜನರು ಬ್ಯಾಂಕ್ ಖಾತೆಗಳ ಮೂಲಕ ಸಕ್ರಿಯವಾಗಿ ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ. ಇದರ ಜೊತೆಗೆ, ಸೈಬರ್ ವಂಚನೆಗಳ ಬಗ್ಗೆ ಎಚ್ಚರಿಕೆ ವಹಿಸುವುದು ಮತ್ತು ಪ್ರಧಾನ ಮಂತ್ರಿಗಳ ವಿವಿಧ ವಿಮಾ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವುದು ಅಗತ್ಯ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಮನ್ವಯ ಅಧಿಕಾರಿ ಕವಿತಾ ಹೇಳಿದರು.
ಚಿಕ್ಕನಾಯಕನಹಳ್ಳಿ ಆರ್ಥಿಕ ಸಾಕ್ಷರತಾ ಕೇಂದ್ರದಿಂದ ಎಳ್ಳೇನಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಆರ್ಥಿಕ ಸಾಕ್ಷರತಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ಸುರಕ್ಷಾ ವಿಮಾ ಮತ್ತು ಜೀವನ ಜ್ಯೋತಿ ವಿಮಾ ಯೋಜನೆಗಳಂತಹ ಉಪಕ್ರಮಗಳನ್ನು ಬಳಸಿಕೊಂಡು ಆರ್ಥಿಕವಾಗಿ ಸಬಲರಾಗಲು ಕರೆ ನೀಡಿದರು. ವಿಶೇಷವಾಗಿ, ವಾರ್ಷಿಕ ಕೇವಲ 20 ರೂ.ಗಳ ಪ್ರೀಮಿಯಂ ಇರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಲ್ಲಿ ನೋಂದಾಯಿಸಿಕೊಳ್ಳಲು ಅವರು ಎಲ್ಲರಿಗೂ ತಿಳಿಸಿದರು.
ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್.ಎಂ. ಕುಮಾರಸ್ವಾಮಿ ಅವರು ಸೈಬರ್ ವಂಚನೆಗಳ ಬಗ್ಗೆ ಜನರಿಗೆ ಎಚ್ಚರಿಕೆ ನೀಡಿದರು. ಓಟಿಪಿ ಹಂಚಿಕೆ, ಎವಿಕೆ ಫೈಲ್ ಡೌನ್ಲೋಡ್, ಬ್ಯಾಂಕ್ ಖಾತೆ ಸೀಜ್ ಬೆದರಿಕೆ, ಕಸ್ಟಮ್ಸ್ ಮತ್ತು ಮೊಬೈಲ್ ಚಾರ್ಜಿಂಗ್ ವಂಚನೆಗಳಂತಹ ವಿವಿಧ ತಂತ್ರಗಳ ಮೂಲಕ ಸೈಬರ್ ಅಪರಾಧಿಗಳು ಹೇಗೆ ಹಣ ಕದಿಯುತ್ತಾರೆ ಎಂಬುದನ್ನು ವಿವರಿಸಿದರು. ಸೈಬರ್ ಅಪರಾಧಗಳನ್ನು ತಡೆಯಲು ಎಲ್ಲರೂ ಜಾಗರೂಕರಾಗಿರಬೇಕು ಎಂದು ಅವರು ಸಲಹೆ ನೀಡಿದರು.ಈ ಶಿಬಿರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿ ಕವಿತಾ, ಗ್ರಾಮದ ಪ್ರಮುಖರಾದ ರಾಧಮ್ಮ, ವನಿತಾ ಮತ್ತು ಸ್ವಸಹಾಯ ಸಂಘಗಳ ಮಹಿಳೆಯರು ಸೇರಿದಂತೆ ಅನೇಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ