-------------
ಹುಳಿಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಪುಣ್ಯಕೋಟಿ ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಸೊಂಡೇನಹಳ್ಳಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತಾ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಶಿಬಿರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಸಮಗ್ರ ಮಾಹಿತಿ ನೀಡುವ ಮೂಲಕ ಗ್ರಾಮಸ್ಥರಿಗೆ ಆರ್ಥಿಕವಾಗಿ ಸಬಲರಾಗಲು ಪ್ರೋತ್ಸಾಹಿಸಲಾಯಿತು.ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಆರ್ಥಿಕ ಸಾಕ್ಷರತಾ ಸಲಹೆಗಾರ ಆರ್. ಎಂ. ಕುಮಾರಸ್ವಾಮಿ ಅವರು, ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ ಜ್ಯೋತಿ ವಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ, ಜನಧನ ಖಾತೆ ಮತ್ತು ಕಿಸಾನ್ ಕ್ರೆಡಿಟ್ ಕಾರ್ಡ್ನಂತಹ ಯೋಜನೆಗಳ ಬಗ್ಗೆ ವಿವರವಾಗಿ ತಿಳಿಸಿದರು. ಬ್ಯಾಂಕ್ಗಳ ಮೂಲಕ ಈ ಯೋಜನೆಗಳ ಲಾಭ ಪಡೆದು ಸಾಮಾಜಿಕ ಭದ್ರತೆ ಪಡೆಯುವುದರ ಜೊತೆಗೆ ಆರ್ಥಿಕವಾಗಿ ಬಲಗೊಳ್ಳುವಂತೆ ಕರೆ ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಚಿಕ್ಕನಾಯಕನಹಳ್ಳಿ ತಾಲೂಕು ಸಮನ್ವಯ ಅಧಿಕಾರಿ ಕವಿತಾ ಅವರು ಮಾತನಾಡಿ, ಮಹಿಳೆಯರು ಬ್ಯಾಂಕ್ ಮತ್ತು ಸಂಜೀವಿನಿ ಒಕ್ಕೂಟದ ಮೂಲಕ ಸಾಲ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿಗಳಾಗಬೇಕು ಎಂದು ತಿಳಿಸಿದರು. ಇದೇ ಉದ್ದೇಶಕ್ಕಾಗಿ ತಮ್ಮ ಸಂಸ್ಥೆಯು ಸಹ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪುಣ್ಯಕೋಟಿ ಜ್ಞಾನವಿಕಾಸ ಕೇಂದ್ರದ ಅಧ್ಯಕ್ಷೆ ವೀಣಾ ಹಾಗೂ ಸೇವಾ ಪ್ರತಿನಿಧಿ ಪದ್ಮ ಉಪಸ್ಥಿತರಿದ್ದರು. ಕೇಂದ್ರದ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಶಿಬಿರದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ