ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ವಾರದ ಸಂತೆ ನಡೆಸಲು ಸೂಕ್ತ ಸ್ಥಳದ ಕೊರತೆಯಿಂದ ಎದುರಾಗಿರುವ ಸಮಸ್ಯೆಯನ್ನು ಪರಿಹರಿಸಲು ಮತ್ತು ಸಂತೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (APMC) ಜಾಗಕ್ಕೆ ಸ್ಥಳಾಂತರಿಸುವ ಕುರಿತು ಚರ್ಚಿಸಲು ಶನಿವಾರ (ಅಕ್ಟೋಬರ್ 4, 2025) ಸಭೆ ಕರೆಯಲಾಗಿದೆ.
ಈ ಕುರಿತು ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳು ಸಭಾ ಸೂಚನಾ ಪತ್ರ ಹೊರಡಿಸಿದ್ದಾರೆ. ಸದ್ಯ ಪ್ರತಿ ಗುರುವಾರ ಸಂತೆ ನಡೆಯುತ್ತಿರುವ ಗಾಂಧೀಪೇಟೆಯ ಮುಖ್ಯ ರಸ್ತೆಯಲ್ಲಿ ಜಾಗದ ಅಭಾವದ ಹಿನ್ನೆಲೆಯಲ್ಲಿ, ಸಂತೆ ಸ್ಥಳಾಂತರಕ್ಕೆ ಆಗ್ರಹಿಸಿ ಇತ್ತೀಚೆಗೆ ರೈತ ಸಂಘದ ವತಿಯಿಂದ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆದಿತ್ತು.
ಕಚೇರಿ ಮುಂಭಾಗ ಮುಷ್ಕರ ನಡೆಸಿದ್ದ ರೈತರು, ಸಂತೆ ನಡೆಸಲು ಸೂಕ್ತ ಜಾಗ ಹಾಗೂ ಮೂಲಭೂತ ಸೌಕರ್ಯ ಒದಗಿಸುವಂತೆ ಮನವಿ ಮಾಡಿದ್ದರು. ಇದರ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿಯ ತಹಶೀಲ್ದಾರ್ ಹಾಗೂ ತುಮಕೂರು ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ, ರೈತರಿಗೆ ಮೂಲಭೂತ ಸೌಕರ್ಯ ಮತ್ತು ಜಾಗ ಗುರುತಿಸುವ ಬಗ್ಗೆ ಮಾತನಾಡಿ, ಸಂತೆಯನ್ನು ಎಪಿಎಂಸಿ ಜಾಗದಲ್ಲಿ ನಡೆಸಲು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವಂತೆ ಸೂಚಿಸಿದ್ದರು.ಇದರ ಅನ್ವಯ, ಅಕ್ಟೋಬರ್ 4, 2025ರ ಶನಿವಾರದಂದು ಬೆಳಿಗ್ಗೆ 11.00 ಗಂಟೆಗೆ ಪಟ್ಟಣ ಪಂಚಾಯಿತಿ ಕೌನ್ಸಿಲ್ ಸಭಾಂಗಣದಲ್ಲಿ ಸಭೆ ನಿಗದಿಪಡಿಸಲಾಗಿದೆ. ಪಪಂ ಅಧ್ಯಕ್ಷೆ ರತ್ನಮ್ಮ ಹಾಗೂ ತಹಶೀಲ್ದಾರ್ ಕೆ.ಪುರಂದರ ಅವರ ಉಪಸ್ಥಿತಿಯಲ್ಲಿ ನಡೆಯಲಿರುವ ಈ ಸಭೆಗೆ ಹಾಜರಾಗುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ, ಸದಸ್ಯರುಗಳಿಗೆ ಮತ್ತು ಸಂಘ ಸಂಸ್ಥೆಯ ಅಧ್ಯಕ್ಷರಿಗೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳು ಕೋರಿದ್ದಾರೆ. ಸಭೆಯಲ್ಲಿ ಸಂತೆ ಸ್ಥಳಾಂತರದ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ