ರತ್ನಮ್ಮ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆ; ಶಾಸಕ ಸಿ.ಬಿ. ಸುರೇಶ್ ಬಾಬು ಸಮ್ಮುಖದಲ್ಲಿ ನಡೆದ ಪ್ರಕ್ರಿಯೆ
ಹುಳಿಯಾರು: ಹುಳಿಯಾರು ಪಟ್ಟಣ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಪ್ರೀತಿ ರಾಘವೇಂದ್ರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರಾಗಿದ್ದ ರತ್ನಮ್ಮ ರೇವಣ್ಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಪ್ರೀತಿ ರಾಘವೇಂದ್ರ ಅವರು ಏಕೈಕ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಅವಿರೋಧವಾಗಿ ಆಯ್ಕೆಯಾದರು ಎಂದು ಚುನಾವಣಾಧಿಕಾರಿಯಾಗಿದ್ದ ಚಿಕ್ಕನಾಯಕನಹಳ್ಳಿ ತಹಸಿಲ್ದಾರ್ ಕೆ. ಪುರಂದರ್ ಅವರು ಘೋಷಿಸಿದರು.
ಚುನಾವಣಾ ಪ್ರಕ್ರಿಯೆ ವಿವರ : ಅಧಿಕೃತ ವೇಳಾಪಟ್ಟಿಯಂತೆ, ಬೆಳಿಗ್ಗೆ 10.00 ಗಂಟೆಯಿಂದ ಮಧ್ಯಾಹ್ನ 12.00 ಗಂಟೆಯವರೆಗೆ ನಾಮಪತ್ರ ಸಲ್ಲಿಕೆಗೆ ಸಮಯ ನಿಗದಿಪಡಿಸಲಾಗಿತ್ತು. ಚುನಾವಣೆ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ತೆರಳಿದ್ದ ಸದಸ್ಯರುಗಳು, ಶಾಸಕ ಸಿ.ಬಿ. ಸುರೇಶ್ ಬಾಬು ಅವರೊಂದಿಗೆ ಸುಮಾರು 11.40ರ ಸುಮಾರಿಗೆ ಪಟ್ಟಣ ಪಂಚಾಯಿತಿಗೆ ಆಗಮಿಸಿದರು. ಈ ವೇಳೆ, ಪ್ರೀತಿ ರಾಘವೇಂದ್ರ ಅವರು ಮಾತ್ರ ನಾಮಪತ್ರ ಸಲ್ಲಿಸಿದರು.
ಮಧ್ಯಾಹ್ನ 12.00 ಗಂಟೆಗೆ ಸಭೆ ಪ್ರಾರಂಭವಾಯಿತು. 12.10 ಗಂಟೆಯವರೆಗೆ ನಾಮಪತ್ರಗಳ ಪರಿಶೀಲನೆ ನಡೆಯಿತು. ಮಧ್ಯಾಹ್ನ 12.11 ರಿಂದ 12.25 ಗಂಟೆಯವರೆಗೆ ಉಮೇದುವಾರಿಕೆ ಹಿಂಪಡೆಯಲು ಅವಕಾಶ ನೀಡಲಾಗಿತ್ತು. ಆದರೆ, ಪ್ರೀತಿ ರಾಘವೇಂದ್ರ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ, ಕಣದಲ್ಲಿ ಅವರೊಬ್ಬರೇ ಉಳಿದರು. ಹೀಗಾಗಿ, ಚುನಾವಣಾಧಿಕಾರಿ ಕೆ. ಪುರಂದರ ಅವರು ಪ್ರೀತಿ ರಾಘವೇಂದ್ರ ಅವರನ್ನು ಪಟ್ಟಣ ಪಂಚಾಯಿತಿ ನೂತನ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿರುವುದಾಗಿ ಘೋಷಿಸಿದರು.
ಈ ಆಯ್ಕೆಯೊಂದಿಗೆ ಅಧ್ಯಕ್ಷ ಸ್ಥಾನ ಯಾರಿಗೆ ಸಿಗಲಿದೆ ಎಂಬ ಪಟ್ಟಣದ ಜನರ ಕುತೂಹಲಕ್ಕೆ ತೆರೆ ಬಿದ್ದಿತು. ಈ ಬಾರಿ ಕೂಡ ಮೈತ್ರಿಕೂಟ ಅಧಿಕಾರಕ್ಕೆ ಬಂದಿದ್ದು, ಬಿಜೆಪಿ ಪಕ್ಷದ ಮೂವರು ಸದಸ್ಯರು, ಕಾಂಗ್ರೆಸ್ ಪಕ್ಷದ ನಾಲ್ವರು ಸದಸ್ಯರು ಹಾಗೂ ಜೆಡಿಎಸ್ ಪಕ್ಷದ ಇಬ್ಬರು ಸದಸ್ಯರು ಸೇರಿ ಒಟ್ಟು 9 ಸದಸ್ಯರು ಪ್ರೀತಿ ರಾಘವೇಂದ್ರ ಅವರ ಅವಿರೋಧ ಆಯ್ಕೆಗೆ ಬೆಂಬಲ ಸೂಚಿಸಿದರು.
ಮಾಜಿ ಅಧ್ಯಕ್ಷೆ ರತ್ನಮ್ಮ, ಹೇಮಂತ್ ಕುಮಾರ್, ಬಿ.ಬಿ. ಫಾತಿಮಾ, ಉಪಾಧ್ಯಕ್ಷೆ ಕಾವ್ಯಾರಾಣಿ, ಮಂಜಾ ನಾಯ್ಕ, ಅಬೂಬುಕರ್ ಸಿದ್ದಿಕ್, ಮಹಮ್ಮದ್ ಜುಬೇರ್, ಎಸ್.ಆರ್.ಎಸ್. ದಯಾನಂದ್, ಬಡಿಗಿರಾಜು ಸೇರಿದಂತೆ ಎಲ್ಲ ಸದಸ್ಯರುಗಳು ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು. ಪ್ರೀತಿ ರಾಘವೇಂದ್ರ ಅವರ ನಾಮಪತ್ರಕ್ಕೆ ಹೇಮಂತ್ ಕುಮಾರ್ ಅವರು ಸೂಚಕರಾಗಿದ್ದು, ಅಬೂಬುಕರ್ ಸಿದ್ದಿಕ್ ಅವರು ಅನುಮೋದಕರಾಗಿದ್ದರು.
ನೂತನ ಅಧ್ಯಕ್ಷರ ಪ್ರತಿಕ್ರಿಯೆ : ಅವಿರೋಧವಾಗಿ ಆಯ್ಕೆಯಾದ ಬಳಿಕ ಮಾತನಾಡಿದ ನೂತನ ಅಧ್ಯಕ್ಷೆ ಪ್ರೀತಿ ರಾಘವೇಂದ್ರ, ತಮ್ಮನ್ನು ಬೆಂಬಲಿಸಿದ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿದರು. ನನ್ನನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿಕೊಳ್ಳಲು ಶಾಸಕ ಸಿ.ಬಿ. ಸುರೇಶ್ ಬಾಬು ಹಾಗೂ ಬೆಂಬಲಿಸಿದ ಸದಸ್ಯರುಗಳ ಸಹಕಾರವೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದ ಅವರು, ಕೊನೆಯ ಕ್ಷಣದವರೆಗೂ ತಮ್ಮೊಂದಿಗೆ ನಿಂತು ಸಹಕರಿಸಿದ ಎಲ್ಲಾ ಸದಸ್ಯರು ಹಾಗೂ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸಿದರು. ಮುಂದಿನ ದಿನಗಳಲ್ಲಿ ಎಲ್ಲರೂ ಒಟ್ಟಾಗಿ, ಜೊತೆಯಾಗಿ ಕೆಲಸ ಮಾಡಿ ಪಟ್ಟಣದ ಅಭಿವೃದ್ಧಿಗೆ ಶ್ರಮಿಸುವ ಸಂಕಲ್ಪವನ್ನು ಅವರು ವ್ಯಕ್ತಪಡಿಸಿದರು.
ಶಾಸಕ ಸಿ.ಬಿ. ಸುರೇಶ್ ಬಾಬು ಹೇಳಿಕೆ : ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸಿ.ಬಿ. ಸುರೇಶ್ ಬಾಬು, ಈ ಅಧ್ಯಕ್ಷರ ಆಯ್ಕೆಯು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ನಡೆದಿದ್ದು, ಹುಳಿಯಾರು ಪಟ್ಟಣದ ಸಮಗ್ರ ಅಭಿವೃದ್ಧಿಗಾಗಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕೆಂದು ಕರೆ ನೀಡಿದರು.
ಚುನಾವಣಾ ಪ್ರಕ್ರಿಯೆಯ ವೇಳೆ ಚುನಾವಣಾಧಿಕಾರಿ ಹಾಗೂ ಚಿಕ್ಕನಾಯಕನಹಳ್ಳಿ ತಹಸಿಲ್ದಾರ್ ಕೆ. ಪುರಂದರ್, ಸಾಲಾಪುರ ಪ್ರತಾಪ್, ಶ್ರೀನಿವಾಸ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಲ್.ವಿ. ಮಂಜುನಾಥ್, ಕಂದಾಯ ಅಧಿಕಾರಿ ಶ್ರುತಿ ಸೇರಿದಂತೆ ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.















ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ