---------------
ಚಿಕ್ಕನಾಯಕನಹಳ್ಳಿ : ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ವಾಹನ ದಟ್ಟಣೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ಅಪರಾಧ ತಡೆಗಟ್ಟುವ ಉದ್ದೇಶದಿಂದ, ಪ್ರಮುಖ ರಸ್ತೆಗಳು ಹಾಗೂ ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸುವಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಿ.ಡಿ. ಚಂದ್ರಶೇಖರ್ ಅವರು ಕೇಂದ್ರ ವಲಯದ ಐಜಿಪಿ ಲಾಬೂ ರಾಮ್ ಅವರಿಗೆ ಮನವಿ ಸಲ್ಲಿಸಿದರು.
ಶನಿವಾರ ವಾರ್ಷಿಕ ಪರಿವೀಕ್ಷಣೆಯ ಅಂಗವಾಗಿ ಐಜಿಪಿ ಲಾಬೂ ರಾಮ್ ಅವರು ಚಿಕ್ಕನಾಯಕನಹಳ್ಳಿಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಮನವಿ ಸಲ್ಲಿಸಲಾಯಿತು. ಗಣಿ ಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಮೀಸಲಿಟ್ಟಿರುವ ವಿಶೇಷ ಅನುದಾನವನ್ನು ಬಳಸಿಕೊಂಡು ಸಿಸಿಟಿವಿ ಯೋಜನೆಯನ್ನು ಜಾರಿಗೆ ತರಬೇಕು ಎಂದು ಚಂದ್ರಶೇಖರ್ ಅವರು ಒತ್ತಾಯಿಸಿದರು.
ಹುಳಿಯಾರು ಹಾಗೂ ಚಿಕ್ಕನಾಯಕನಹಳ್ಳಿ ಪಟ್ಟಣಗಳ ಆಯಕಟ್ಟಿನ ಜಂಕ್ಷನ್ಗಳು, ವಾಣಿಜ್ಯ ಪ್ರದೇಶಗಳು ಮತ್ತು ಪ್ರಮುಖ ಪ್ರವೇಶ ದ್ವಾರಗಳಲ್ಲಿ ಸಿಸಿಟಿವಿ ಕ್ಯಾಮರಗಳನ್ನು ಅಳವಡಿಸುವುದರಿಂದ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಲಿದ್ದು, ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.
ಮನವಿಯನ್ನು ಸ್ವೀಕರಿಸಿ ಪ್ರತಿಕ್ರಿಯಿಸಿದ ಐಜಿಪಿ ಲಾಬೂ ರಾಮ್ ಅವರು, “ಆಧುನಿಕ ಕಾಲಘಟ್ಟದಲ್ಲಿ ಅಪರಾಧ ಪತ್ತೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಸಿಸಿಟಿವಿ ತಂತ್ರಜ್ಞಾನ ಅತ್ಯಗತ್ಯವಾಗಿದೆ. ಇದರಿಂದ ಸಂಚಾರ ನಿಯಮ ಉಲ್ಲಂಘನೆ ಹಾಗೂ ಕಳ್ಳತನದಂತಹ ಪ್ರಕರಣಗಳನ್ನು ನಿಯಂತ್ರಿಸಲು ಸಾಧ್ಯವಾಗುತ್ತದೆ. ಈ ಪ್ರಸ್ತಾವನೆಯನ್ನು ಗಂಭೀರವಾಗಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು,” ಎಂದು ಭರವಸೆ ನೀಡಿದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ