ಹುಳಿಯಾರು: ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ₹೧೭೦೦ ಕೋಟಿ ಮೊತ್ತದ ಕ್ರಿಯಾಯೋಜನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೇ ಜನರ ಮನೆಬಾಗಿಲಿಗೆ ಬಂದು ಸಮಸ್ಯೆ ಆಲಿಸುವ 'ಮನೆಬಾಗಿಲಿಗೆ ಮನೆಮಗ' ಕಾರ್ಯಕ್ರಮದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ಶಾಸಕ ಸಿ.ಬಿ.ಸುರೇಶ್ಬಾಬು ಕರೆ ನೀಡಿದರು.
ತಾಲ್ಲೂಕಿನ ದೊಡ್ಡಬಿದರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸತತ ೨೫ನೇ ವಾರದ ‘ಮನೆಬಾಗಿಲಿಗೆ ಮನೆಮಗ’ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಭಿವೃದ್ಧಿಯ ಪ್ರಮುಖ ಅಂಶಗಳು:
ರೂ. ೨೭೬ ಕೋಟಿ ವೆಚ್ಚದ ಕಾಮಗಾರಿ: ದೊಡ್ಡಬಿದರೆ ಗ್ರಾ.ಪಂ ವ್ಯಾಪ್ತಿಯಲ್ಲಿ ಭದ್ರ ಮೇಲ್ದಂಡೆ ಯೋಜನೆ, ಶಾಸಕರ ಅನುದಾನ ಹಾಗೂ ಗಣಿಬಾಧಿತ ಪ್ರದೇಶಾಭಿವೃದ್ಧಿ ನಿಧಿಯಡಿ ರಸ್ತೆ, ಕಟ್ಟಡ ಮತ್ತು ಸೇತುವೆ ನಿರ್ಮಾಣ ಕಾರ್ಯಗಳು ನಡೆಯುತ್ತಿವೆ.
ಕೃಷಿ ಮತ್ತು ಶಿಕ್ಷಣಕ್ಕೆ ಒತ್ತು: ೭ ಸಾವಿರ ರೈತರಿಗೆ ತುಂತುರು ನೀರಾವರಿ ಸೆಟ್ ವಿತರಣೆ ಮಾಡಲಾಗಿದೆ. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ವಿಶೇಷ ಶಿಬಿರ ಹಾಗೂ ಉಚಿತ ಸಿಇಟಿ/ನೀಟ್ ತರಬೇತಿ ನೀಡಲಾಗುತ್ತಿದೆ. ಕಳೆದ ಬಾರಿ ೯೪ ವಿದ್ಯಾರ್ಥಿಗಳು ಈ ತರಬೇತಿಯಿಂದ ಸರ್ಕಾರಿ ಕೋಟಾದಡಿ ಉನ್ನತ ವ್ಯಾಸಂಗಕ್ಕೆ ಆಯ್ಕೆಯಾಗಿದ್ದಾರೆ ಎಂದರು.
ಪವತಿ ಖಾತೆ ಆಂದೋಲನ:ಸಾರ್ವಜನಿಕರು ಅಲೆದಾಡುವುದನ್ನು ತಪ್ಪಿಸಲು ಕೇವಲ ೧೫ ದಿನಗಳಲ್ಲಿ ಪವತಿ ಖಾತೆ ಮಾಡಿಕೊಡುವ ವಿಶೇಷ ಅಭಿಯಾನ ಆಯೋಜಿಸಲಾಗಿದೆ.ಜನರು ಅಧಿಕಾರಿಗಳನ್ನು ಹುಡುಕಿಕೊಂಡು ಅಲೆದಾಡುವುದನ್ನು ತಪ್ಪಿಸಲು ಈ ಕಾರ್ಯಕ್ರಮ ರೂಪಿಸಲಾಗಿದೆ. ಇಲ್ಲಿ ಸಲ್ಲಿಕೆಯಾಗುವ ಪ್ರತಿ ಅರ್ಜಿಯ ವಿಲೇವಾರಿ ಬಗ್ಗೆ ನಿಗಾ ವಹಿಸಲಾಗುವುದು ಎಂದರು.
ಸ್ಥಳದಲ್ಲೇ ಕೆಎಸ್ಆರ್ಟಿಸಿ ಸಮಸ್ಯೆ ಬಗೆಹರಿಸಿದ ಶಾಸಕರು:ಸಭೆಯಲ್ಲಿ ಬಳ್ಳೆಕಟ್ಟೆ ಗ್ರಾಮದ ಬಳಿ ಕೆಎಸ್ಆರ್ಟಿಸಿ ಬಸ್ ನಿಲುಗಡೆಗೆ ಸಾರ್ವಜನಿಕರು ಮನವಿ ಮಾಡಿದರು. ತಕ್ಷಣವೇ ಕಾರ್ಯಪ್ರವೃತ್ತರಾದ ಶಾಸಕರು, ಕೆಎಸ್ಆರ್ಟಿಸಿ ಡಿಎಂ ಅವರಿಗೆ ದೂರವಾಣಿ ಕರೆ ಮಾಡಿ, ನಾಳೆಯಿಂದಲೇ ಬಸ್ ನಿಲುಗಡೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.
ತಾಂಡಾ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿ ಸಂಗಮೇಶ್ ಮಾತನಾಡಿ, ಇಂತಹ ವಿಭಿನ್ನ ಕಾರ್ಯಕ್ರಮ ರಾಜ್ಯದಲ್ಲಿಯೇ ಮೊದಲನೆಯದು ಎಂದು ಶ್ಲಾಘಿಸಿದರು. ನಿಗಮದ ಸ್ವಾವಲಂಬಿ ಮತ್ತು ಗಂಗಾ ಕಲ್ಯಾಣ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಪಶುವೈದ್ಯಾಧಿಕಾರಿ ಕಾಂತರಾಜು ಪ್ರಾಸ್ತಾವಿಕವಾಗಿ ಮಾತನಾಡಿ, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅದರ ವಿಲೇವಾರಿ ತಿಳಿಯುವ ಬಗ್ಗೆ ಜನರಿಗೆ ಮಾಹಿತಿ ನೀಡಿದರು.
ಬಳ್ಳೆಕಟ್ಟೆ, ಪೋಚಕಟ್ಟೆ, ದೊಡ್ಡಬಿದರೆ ಸೇರಿದಂತೆ ವಿವಿಧ ಗ್ರಾಮಗಳ ಜನರು ನಿವೇಶನ, ಹಕ್ಕುಪತ್ರ, ಬೀದಿ ದೀಪ ಹಾಗೂ ಶೌಚಾಲಯದಂತಹ ಮೂಲಭೂತ ಸೌಕರ್ಯಗಳಿಗಾಗಿ ಅರ್ಜಿ ಸಲ್ಲಿಸಿದರು.
ಉಪಸ್ಥಿತಿ: ಸಭೆಯಲ್ಲಿ ದೊಡ್ಡಬಿದರೆ ಗ್ರಾ.ಪಂ ಅಧ್ಯಕ್ಷೆ ಶಾಲಿನಿ, ತಹಸೀಲ್ದಾರ್ ಮಮತಾ, ಗ್ರೇಡ್-೨ ತಹಸೀಲ್ದಾರ್ ರಂಗನಾಥ್, ಸಮಾಜ ಕಲ್ಯಾಣಾಧಿಕಾರಿ ಶ್ರೀಧರ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವರಾಜ್ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ